
ಇಂದು ಸಂಜೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ
ಹಾವೇರಿ.ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಸನ್ಮಾನ್ಯ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದಲ್ಲಿ ಸಾರ್ವಜನಿಕರು ವೀಕ್ಷಣೆ ಮಾಡಬಹುದಾಗಿದೆ.
ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4.05ಕ್ಕೆ ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಮತ್ತು ಮಹತ್ವದ ಕ್ಷಣವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು ರಾಜ್ಯದ ಆಯ್ದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ.
ರಾಜ್ಯದ ಜನತೆಗೆ ಈ ಮಹತ್ವದ ಕಾರ್ಯಕ್ರಮವನ್ನು ತಲುಪಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ‘ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್’ ಸಂಸ್ಥೆಯ ಸಹಯೋಗದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ರಾಜ್ಯಾದ್ಯಂತ ಇರುವ ಪ್ರಮುಖ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಲಾಗಿರುವ ಡಿಜಿಟಲ್ ಡಿಸ್ಪ್ಲೇ ಪರದೆಗಳ ಮೂಲಕ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಂಪೂರ್ಣ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಗುತ್ತದೆ.
ದೂರದ ಊರುಗಳಿಗೆ ಪ್ರಯಾಣಿಸುವ ಸಾರ್ವಜನಿಕರು ಹಾಗೂ ಸಾಮಾನ್ಯ ಜನರು ಈ ಐತಿಹಾಸಿಕ ಸಮಾರಂಭದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಈ ತಂತ್ರಜ್ಞಾನ ಆಧಾರಿತ ಉಪಕ್ರಮವನ್ನು ಕೈಗೊಳ್ಳಲಾಗಿದೆ. ಇದರಿಂದಾಗಿ ಸಾರ್ವಜನಿಕರು ತಮ್ಮ ಹತ್ತಿರದ ಬಸ್ ನಿಲ್ದಾಣಗಳಲ್ಲೇ ನಿಂತು ಮುಖ್ಯಮಂತ್ರಿಗಳು ಹಾಗೂ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಉಚಿತವಾಗಿ ಕಣ್ತುಂಬಿಕೊಳ್ಳಬಹುದಾಗಿದೆ.
ಲೋಕ ಭವನದಲ್ಲಿ ನಡೆಯಲಿರುವ ಈ ಅದ್ಧೂರಿ ಕಾರ್ಯಕ್ರಮಕ್ಕೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳು ಪೂರ್ಣಗೊಂಡಿದ್ದು, ಇಡೀ ರಾಜ್ಯದ ಕಣ್ಣು ಇಂದು ಸಂಜೆ ಬಸ್ ನಿಲ್ದಾಣಗಳ ಡಿಜಿಟಲ್ ಪರದೆಗಳತ್ತ ನೆಡಲಿವೆ.

