ಉಪಸಭಾಪತಿ ರುದ್ರಪ್ಪ ಲಮಾಣಿಗೆ ಹೃದಯ ಶಸ್ತ್ರ ಚಿಕಿತ್ಸೆ, ಆರೋಗ್ಯ ವಿಚಾರಿಸಿದ ಶಾಸಕ ಶಿವಣ್ಣನವರ
ಹಾವೇರಿ: ಹಾವೇರಿ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ವಿಧಾನಸಭೆಯ ಉಪಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಜ.೧ರಂದು ಹೃದಯ ಶಸ್ತ್ರ ಚಿಕಿತ್ಸೆಮಾಡಲಾಗಿದ್ದು, ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಜ.೫ರಂದು ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವ ಬಸವರಾಜ ಶಿವಣ್ಣನವರ, ನಗರಸಭೆಯ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ರುದ್ರಪ್ಪ ಲಮಾಣಿ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿ ಬೇಗನೆ ಗುಣಮುಖರಾಗಿ ಎಂದು ಶುಭಹಾರೈಸಿದರು.
ಆರೋಗ್ಯ ತಪಾಸಣೆಯ ವೇಳೆ ಹೃದಯದಲ್ಲಿ ತೊಂದರೆಕಂಡು ಬಂದಿದ್ದರಿಂದ ಸ್ಥಳೀಯ ವೈದ್ಯರು ಹೃದಯ ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದ್ದರಿಂದ ರುದ್ರಪ್ಪ ಲಮಾಣಿ ಅವರು ಬೆಂಗಳೂರಿನಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಹೆಸರಾಗಿರುವ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿದ್ದರು, ಅಲ್ಲಿನ ಹೃದಯ ತಜ್ಞ ವೈದ್ಯರು ಜ.೧ರಂದು ರುದ್ರ್ಪ್ಪ ಲಮಾಣಿ ಅವರಿಗೆ ಲಘು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಕೈಗೊಂಡಿದ್ದರು, ಲಮಾಣಿ ಅವರಿ ಚೇತರಿಸಿಕೊಳ್ಳುತ್ತಿದ್ದಾರೆಂದು, ರುದ್ರಪ್ಪ ಲಮಾಣಿ ಅವರ ಆರೈಕೆಯನ್ನು ಸ್ವತಃ ವೈದ್ಯರಾಗಿರುವ ರುದ್ರಪ್ಪ ಲಮಾಣಿ ಅವರ ಪುತ್ರಿ ಹಾಗೂ ಪತ್ನಿ ಶ್ರೀಮತಿ ಮಂಜುಳಾ ಅವರು ನೋಡಿಕೊಳ್ಳುತ್ತಿದ್ದಾರೆ ಮೂಲಗಳು ತಿಳಿಸಿವೆ.
ಈಮಧ್ಯೆ ತಮಗೆ ಹೃದಯ ಶಸ್ತ್ರ ಚಿಕಿತ್ಸೆಯಾದ ಬಗ್ಗೆ ರುದ್ರಪ್ಪ ಲಮಾಣಿ ಅವರು ತಮ್ಮ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ. ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ. ಸದ್ಯ ನಾನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೆ, ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ನೀವ್ಯಾರು ಆಸ್ಪತ್ರೆಗೆ ಬರಬಾರದೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆ. ಕಚೇರಿಯ ಕೆಲಸಗಳು ಇದ್ದಲ್ಲಿ ನನ್ನ ಆಪ್ತ ಕಾರ್ಯದರ್ಶಿಗಳಿಗೆ ಹಾಗೂ ನನ್ನ ಅಪ್ತ ಸಹಾಯಕರನ್ನು ಸಂಪರ್ಕಿಸಿರಿ ನಿಮ್ಮ ಶುಭ ಹಾರೈಕೆಗಳು ನನ್ನನ್ನು ಮಾನಸಿಕವಾಗಿ ಮತ್ತಷ್ಟು ಗಟ್ಟಿ ಮಾಡಿದ್ದು, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ. ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಅನಂತ ಧನ್ಯವಾದಗಳು ಎಂದು ತಿಳಿಸಿದ್ದಾರೆ.