ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ : ಚಲವಾದಿ ಮುಖಂಡರ ಒತ್ತಾಯ
ಹಾವೇರಿ: ಮಾಜಿ ಉಪಮುಖ್ಯಮಂತ್ರಿ ಹಾಗೂ ಕೊರಟಗೆರೆ ಶಾಸಕರು, ದಲಿತ ಮುಖಂಡರು ಹಾಗೂ ಎಸ್ಸಿ ಬಲಗೈ ಸಮಾಜಕ್ಕೆ ಸೇರಿರುವ ಡಾ.ಜಿ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರರು ಹಾಗೂ ಚಲವಾದಿ ಮುಖಂಡರಾದ ಡಾ. ಸಂಜಯ ಡಾಂಗೆ ಕಾಂಗ್ರಸ್ ಹೈಕಮಾಂಡನ್ನು ಒತ್ತಾಯಿಸಿದ್ದಾರೆ.
ಮಂಗಳವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿದ್ಯಾವಂತ, ದಕ್ಷ, ಪ್ರಾಮಾಣಿಕ ಮತ್ತು ಸಜ್ಜನ ರಾಜಕಾರಣಿ ಡಾ.ಜಿ.ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆಗಳಿದ್ದು, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಈ ಬಾರಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ನ್ಯಾಯವಿದೆ ಎಂಬುದನ್ನು ಸಾಬೀತು ಪಡಿಸುವಂತೆ ಆಗ್ರಹಿಸಿದರು.
ಇಂದು ಕಾಂಗ್ರೆಸ್ ಪಕ್ಷ ಅತ್ಯಂತ ಬಹುಮತಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯುವ ಹಂತಕ್ಕೆ ಬಂದಿದೆ ಎಂದರೆ ಅದರ ಹಿಂದೆ ಡಾ.ಜಿ.ಪರಮೇಶ್ವರ್ ಅವರ ಶ್ರಮವಿದೆ. ಮಧುಗಿರಿ ಮತ್ತು ಕೊರಟಗೆರೆ ಮೀಸಲು ಕ್ಷೇತ್ರಗಳಲ್ಲಿ ತಲಾ ಮೂರು ಬಾರಿ ಸೇರಿದಂತೆ ೬ನೇ ಬಾರಿಗೆ ವಿಧಾನಸಭೆ ಪ್ರವೇಶಿಸಿರುವ ಡಾ.ಜಿ.ಪರಮೇಶ್ವರ್ ರೇಷ್ಮೆ ಸಚಿವರಾಗಿ, ಉನ್ನತ ಶಿಕ್ಷಣ, ವೈದ್ಯಕೀಯ ಶಿಕ್ಷಣ ಸಚಿವರಾಗಿ, ಗೃಹ ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ ಸಣ್ಣ ಲೋಪದೋಷವೂ ಇಲ್ಲದೆ ಕಾರ್ಯ ನಿರ್ವಹಿಸಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿ ಅತ್ಯಂತ ಉತ್ತಮ ಪ್ರಣಾಳಿಕೆ ನೀಡಿ ಅದು ರಾಜ್ಯದ ಮತದಾರರ ಮನೆ ಮತ್ತು ಮನಗಳನ್ನು ತಲುಪುವಂತೆ ಮಾಡಿದ್ದಾರೆ. ಹಾಗಾಗಿ ಈ ಬಾರಿ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿಯಾಗಿ ನೇಮಿಸುವ ಮೂಲಕ ಪಕ್ಷಕ್ಕಾಗಿ ದುಡಿದವರಿಗೆ ಮನ್ನಣೆ ನೀಡಬೇಕೆಂಬುದು ನಮ್ಮ ಒತ್ತಾಯವಾಗಿದೆ ಎಂದರು.
ಕಾಂಗ್ರೆಸ್ ಪಕ್ಷವು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯಸಭಾ ಸದಸ್ಯತ್ವ ನೀಡುವುದರ ಜೊತೆ ಎಐಸಿಸಿ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ದಲಿತ ನಾಯಕನಿಗೆ ಮನ್ನಣೆ ನೀಡಿದೆ. ಅದೇ ರೀತಿ ರಾಜ್ಯದಲ್ಲಿ ಕಾಂಗ್ರೆಸ್ಪಕ್ಷಕ್ಕೆ ಅವಿರತವಾಗಿ ಸೇವೆ ಸಲ್ಲಿಸಿರುವ ಡಾ.ಜಿ.ಪರಮೇಶ್ವರ ಅವರ ಸೇವೆಯನ್ನು ಗುರುತಿಸಿ ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಕಾಂಗ್ರೆಸ್ ಹೈಕಮಾಂಡ್ ನೀಡುವ ಮೂಲಕ ದಲಿತ ನಾಯಕನಿಗೆ ಗೌರವ ನೀಡಬೇಕೆಂದು ಡಾ.ಸಂಜಯ ಡಾಂಗೆ ಆಶಯ ವ್ಯಕ್ತಪಡಿಸಿದರು.
ನ್ಯಾಯವಾದಿ ಕಾಂಗ್ರೆಸ್ ಮುಖಂಡ ಡಾ.ಸುರೇಶ ಯಲ್ಲಟ್ಟಿ ಮಾತನಾಡಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ದಲಿತ ಬಲಗೈ ಸಮಾಜಕ್ಕೆ ಸೇರಿರುವ ಇವರು ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದ ದಲಿತ, ಇತರ ಪ್ರಮುಖ ಸಮುದಾಯಗಳು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ವಿಶ್ವಾಸ ಗಳಿಸಿದ್ದಾರೆ. ಸತತ ಎರಡು ಅವಧಿಗೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ಇವರು ಅತಿ ದೀರ್ಘ ಕಾಲ ಈ ಹುದ್ದೆ ಅಲಂಕರಿಸಿದ ಹೆಗ್ಗಳಿಕೆ ಹೊಂದಿದ್ದಾರೆ.
ಈಹಿಂದೆ ಇವರಿಗೆ ಮುಖ್ಯಂತ್ರಿಯಾಗುವ ಅವಕಾಶ ಇದ್ದರೂ ಸಹ ಸೋಲಿನ ಕಾರಣಕ್ಕೆ ಇವರು ಹಿಂದೆ ಸರಿಯಬೇಕಾಯಿತು. ಕಾಂಗ್ರೆಸ್ಪಕ್ಷದ ಸಂಘಟನೆಗೆ ತಮ್ಮನ್ನೆ ಅರ್ಪಿಸಿಕೊಂಡಿರುವ ಇವರ ಸೇವೆಯನ್ನು ಗುರುತಿಸಿ ಕಾಂಗ್ರೆಸ್ ವರಿಷ್ಠರು ಡಾ.ಜಿಪರಮೇಶ್ವರ ಅವರನ್ನು ಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡುವಂತೆ ಅವರು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನ್ಯಾಯವಾದಿ ಸತೀಶ ಕಾಟೇನಹಳ್ಳಿ, ರವಿ ಕಾಳೆ,ಚಂದ್ರಪ್ಪ ಸನಾದಿ, ಸಚಿನ್ ಮಡ್ಡಿ ಶಂಕರ ಇಂಗಳಗಿ, ವಿಜಯ ಚಲವಾದಿ ಮತ್ತಿತರರು ಇದ್ದರು.
.