
ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರಕ್ಕೆ ನೀಡಿದ ಪ್ರಾಮುಖ್ಯತೆ ಹಾವೇರಿ ಜಿಲ್ಲೆಗೆ ನೀಡಿರುವೆ: ಉಸ್ತುವಾರಿ ಸಚಿವ ಶಿವಾನಂದ ಪಾಟೀಲ
ಹಾವೇರಿ:ಜಿಲ್ಲಾ ಉಸ್ತುವಾರಿ ಹೊಣೆ ಹೊತ್ತು ಎರಡು ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಬಸವಣ್ಣನ ಜನ್ಮಸ್ಥಳ ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ನಾನು ನನ್ನ ಕ್ಷೇತ್ರದ ಅಭಿವೃದ್ಧಿಗೆ ಎಷ್ಟು ಪ್ರಾಮುಖ್ಯತೆ ನೀಡಿದ್ದೇನೆಯೋ ಅಷ್ಟೇ ಪ್ರಾಮುಖ್ಯತೆಯನ್ನು ಹಾವೇರಿ ಜಿಲ್ಲೆಗೂ ನೀಡಿದ್ದೇನೆ. ಹೀಗಾಗಿಯೇ ನನೆಗುದಿಗೆ ಬಿದ್ದಿದ್ದ ಹಲವು ಪ್ರಮುಖ ಯೋಜನೆಗಳು ಕಾರ್ಯಗತಗೊಳ್ಳುತ್ತಿವೆ. ಸತತ ಪ್ರಯತ್ನದ ಫಲವಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಪೂರ್ಣ ಪ್ರಮಾಣದಲ್ಲಿ ಸ್ವಂತ ಕಟ್ಟಡದಲ್ಲಿ ಆರಂಭವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು.
ವಿಶೇಷ ಎಂದರೆ ರಾಜ್ಯದಲ್ಲಿ ನಾಲ್ಕು ಜಿಲ್ಲೆಗಳಿಗೆ ಏಕ
ಕಾಲಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರಾಗಿದ್ದರೂ ಸ್ವಂತ ಕಟ್ಟಡದಲ್ಲಿ ಪೂರ್ಣ ಪ್ರಮಾಣದಲ್ಲಿ ಕಾಲೇಜು ಆರಂಭವಾಗಿರುವ ಏಕೈಕ ಜಿಲ್ಲೆ ಎಂಬ ಹೆಗ್ಗಳಿಕೆ ಹಾವೇರಿಯದ್ದುಎಂದರು.
ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಯ ಗಂಭೀರತೆ ಹಾಗೂ ಜಿಲ್ಲೆಯ ಜನ ವೈದ್ಯಕೀಯ ಸೇವೆ ಪಡೆಯಲು ದಾವಣಗೆರೆ ಮತ್ತು ಹುಬ್ಬಳ್ಳಿಗೆ ಹೋಗುತ್ತಿರುವುದನ್ನು ಗಮನಿಸಿ, ಜೀವಜಲ ಮತ್ತು ಆರೋಗ್ಯ ಸೇವೆಯನ್ನು ಆದ್ಯತೆ ಮೇಲೆ ಒದಗಿಸಬೇಕು ಎಂದು ಉಸ್ತುವಾರಿ ಹೊಣೆ ವಹಿಸಿಕೊಂಡ ಆರಂಭದಲ್ಲೇ ನಿರ್ಣಯ ಮಾಡಿದೆ. ಹಾವೇರಿಯಲ್ಲಿ ಆಯೋಜಿಸಿದ ಬಸವ ಜಯಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನನ್ನನ್ನು ಭೇಟಿ ಮಾಡಿದ ಹಾವೇರಿ ಶಹರದ ಮಾತೆಯರು, ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಹಾವೇರಿಗೆ ಹೆಣ್ಣಾ ಕೊಡಲು ಹಿಂದೇಟು ಹಾಕುತ್ತಿದ್ದಾರೆ. ನಮಗೆ ಕುಡಿಯುವ ನೀರು ಕೊಡಿ ಸಾಕು. ಮತ್ತೇನನ್ನೂ ಕೇಳಲ್ಲ ಎಂದು ಮನವಿ ಮಾಡಿದ್ದರು. ಆಗ ಖಂಡಿತ ಕುಡಿಯುವ ನೀರು ಕೊಡುತ್ತೆಗೆ ಎಂದು ಅವರಿಗೆ ಮಾತು ಕೊಟ್ಟಿದ್ದೆ.
ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡ ಸಂದರ್ಭದಲ್ಲಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗೆ ಬಹುಪಾಲು ಪರಿಹಾರ ಎಂದು ಭಾವಿಸಲಾಗಿರುವ 1325 ಕೋಟಿ ರೂ. ವೆಚ್ಚದ ಮೂರು ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಗಳು ನನೆಗುದಿಗೆ ಬಿದ್ದಿದ್ದವು. ಶಾಸಕರೊಂದಿಗೆ ಸತತ ಅಧಿಕಾರಿಗಳ ಸಭೆ ಆಯೋಜನೆ ಮಾಡಿ ಯೋಜನೆಗಳ ಅನುಷ್ಠಾನಕ್ಕೆ ಇದ್ದ ಅಡೆತಡೆಗಳನ್ನು ನಿವಾರಿಸಿ ಕಾಮಗಾರಿಗೆ ವೇಗ ನೀಡಲಾಯಿತು. ಇದರ ಪರಿಣಾಮ ಈಗ ಈ ಮೂರೂ ಯೋಜನೆಗಳು ಟ್ರಯಲ್ರನ್ಹಂತಕ್ಕೆ ಬಂದಿವೆ. ಈ ಯೋಜನೆಗಳ ಅನುಷ್ಠಾನದಿಂದ 451 ಜನವಸತಿಗಳಿಗೆ ನೀರು ಪೂರೈಕೆಯಾಗಲಿದೆ. ಹಾವೇರಿ ನಗರ, ಗುತ್ತಲ, ರಟ್ಟಿಹಳ್ಳಿ ಪಟ್ಟಣಗಳಿಗೆ ನೀರು ಪೂರೈಕೆ ಮಾಡಲು 116.35 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಂಡಿದ್ದೇವೆ. ಜಿಲ್ಲೆಯ ಇತರ ಪಟ್ಟಣಗಳಲ್ಲೂ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆಗಳನ್ನು ರೂಪಿಸಲಾಗಿದೆ.
ರೈತರ ಸಭೆಗಳನ್ನು ನಿಯಮಿತವಾಗಿ ನಡೆಸುವ ಮೂಲಕ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರಕ್ಕೆ ಪ್ರಯತ್ನಿಸಿದ್ದೇನೆ. 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲಾಗಿದೆ. ಈ ಸಾಧನೆಗಾಗಿ ಜಿಲ್ಲೆಗೆ ರಾಷ್ಟ್ರೀಯ ಪುರಸ್ಕಾರ ಲಭಿಸಿದೆ.
ರಟ್ಟಿಹಳ್ಳಿ ತಾಲೂಕು ಮದಗ – ಮಾಸೂರು ಕೆರೆಯ ಎಡದಂಡೆ ಮತ್ತು ಬಲದಂಡೆ ಮುಖ್ಯ ನಾಲೆಗಳನ್ನು ಆಧುನೀಕರಣಗೊಳಿಸುವ 52.20 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ದೊರೆತಿದ್ದು, ಈ ಯೋಜನೆಯಿಂದ ಅಚ್ಚುಕಟ್ಟು ಕಡೆಯ ಭಾಗದ ರೈತರ ಸಮಸ್ಯೆಗೆ ಪರಿಹಾರ ಸಿಗಲಿದೆ.
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಿಭಜನೆ ಮಾಡಿ ಹಾವೇರಿ ಜಿಲ್ಲೆಗೆ ಪ್ರತ್ಯೇಕ ಬ್ಯಾಂಕ್ರಚನೆ ಮಾಡಬೇಕು ಎಂಬುದು ರೈತರ ಬೇಡಿಕೆಯಾಗಿತ್ತು. ನಷ್ಟದಲ್ಲಿರುವ ಕಾರಣ ಇದು ಸಾಧುವಲ್ಲ ಎಂಬುದನ್ನು ಮನಗಂಡು ರೈತರಿಗೆ ಸಮರ್ಪಕ ಕೃಷಿ ಸಾಲ ವಿತರಣೆ ಉದ್ದೇಶದಿಂದ ಹಾವೇರಿಯಲ್ಲಿ ಪ್ರಾದೇಶಿಕ ಕಚೇರಿಯನ್ನು ಆರಂಭಿಸಲಾಗಿದೆ. ನಷ್ಟದಲ್ಲಿರುವ ಹಾಲು ಒಕ್ಕೂಟ ಪುನಶ್ಚತನಕ್ಕೂ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೃಷಿ ಮಾರುಕಟ್ಟೆ ಸಚಿವನಾಗಿ ಜಿಲ್ಲೆಯ ಎಲ್ಲ ಎಪಿಎಂಸಿಗಳಲ್ಲಿ ಮೂಲಸೌಕರ್ಯ ಮತ್ತು ಶೀತಲಗೃಹ ನಿರ್ಮಾಣಕ್ಕೆ ಸುಮಾರು 45 ಕೋಟಿ ರೂ.ಗಳನ್ನು ವಿನಿಯೋಗ ಮಾಡಲಾಗಿದೆ. ಬ್ಯಾಡಗಿ ಎಪಿಎಂಸಿಯಲ್ಲಿ ವಾಹನಗಳ ನಿಲುಗಡೆಗಾಗಿ 10 ಕೋಟಿ ರೂ. ವೆಚ್ಚದಲ್ಲಿ ಪಾಕಿರ್ಂಗ್ ಕಟ್ಟಡ ನಿರ್ಮಿಸಲಾಗಿದೆ.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಯಾವಾಗಲೂ ಸ್ಪಂದಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರು ಹಾಗೂ ಪಕ್ಷದ ಮುಖಂಡರ ಸಹಕಾರದಿಂದ ಅನುಷ್ಠಾನಕ್ಕೆ ತರಲು ಸಾಧ್ಯವಾಗಿದೆ. ಇನ್ನೂ ಹಲವು ಅಭಿವೃದ್ಧಿ ಯೋಜನೆಗಳು ಪ್ರಗತಿಯಲ್ಲಿವೆ ಎಂದರು.
ಸಂದರ್ಭದಲ್ಲಿ ಸಚಿವರು ಪ್ರಗತಿ ಪಥ ಹಾವೇರಿ ಜಿಲ್ಲೆ ಪುಸ್ತಕ ಬಿಡುಗಡೆ ಮಾಡಿದರು.
ಶಾಸಕರಾದ ಯು.ಬಿ.ಬಣಕಾರ, ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕರಾದ ಶ್ರೀ ನಿವಾಸ ಮಾನೆ, ಯಾಸೀರ್ ಖಾನ್ ಪಠಾಣ್, ಪ್ರಕಾಶ ಕೋಳಿವಾಡ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ , ಎಸ್ ಪಿ ಯಶೋಧ ಒಂಟಗೋಡಿಇತರರು ಇದ್ದರು.

