ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಹಾವೇರಿ, ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೆ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜ,೧೫ರಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಘಟನೆ ನಡೆದುಹಲವುದಿನಗಳ ಕಳೆದರು ಸಹ ಸರ್ಕಾರದ ಪರವಾಗಿ ಯಾರೂ ಸಾಂತ್ವನ ಹೇಳಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ ಸಿಎಂ ಪರಿಹಾರ ಕೋರಿ ಈಗ ತಾನೇ ಅರ್ಜಿ ಕೊಟ್ಟಿದ್ದಾರೆ ಅದನ್ನು ಪರಿಗಣಿಸಲಾಗುವುದು ಎಂದರು.
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಎಲ್ಲ ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ನೈತಿಕ ಪೊಲೀಸ್ ಗಿರಿ ಬಗ್ಗೆ ಮಾತನಾಡುತ್ತಾರೆ, ಅತ್ಯಾಚಾರ ಪ್ರಕರಣದ ಬಗ್ಗೆ ಮಾತನಾಡಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು ಮಾತನಾಡಿದರೆ ಮಾತ್ರ ಕ್ರಮ ಇಲ್ಲದಿದ್ದರೆ ಇಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಮಾತನಾಡದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲವೇ ಎಂದರು.
ಪ್ರಾಥಮಿಕ ವರದಿ ಬಂದ ನಂತರ ತೀರ್ಮಾನ: ಪ್ರಕರಣವನ್ನು ಎಸ್.ಐ.ಟಿಗೆ ವಹಿಸಲು ಬಿಜೆಪಿ ಆಗ್ರಹ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಎಸ್.ಐ.ಟಿ ನಲ್ಲಿರುವವವರೂ ಪೊಲೀಸರೇ ಎಂದರು. ಪ್ರಕರಣದ ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿ ಬಂದ ನಂತರ ತೀರ್ಮಾನಿಸಲಾಗುವುದು ಎಂದರು. ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಪ್ರಕರಣ ಮುಚ್ಚಿ ಹಾಕವ ಪ್ರಶ್ನೆಯೇ ಇಲ್ಲ, ತಪ್ಪು ಮಾಡಿದವರ ಮೇಲೆ ಕ್ರಮ ವಹಿಸಲಾಗುವುದು ಎಂದರು.
ಬೆಳಗಾವಿ ಜಿಲ್ಲೆಯ ಪ್ರಕರಣದಲ್ಲಿ ಮಾತ್ರ ತಕ್ಷಣ ಭೇಟಿ ನೀಡಿ ಪರಿಹಾರ ನೀಡಿದಿರಿ ಎಂಬ ಪ್ರಶ್ನೆಗೆ, ಅಲ್ಲಿಗೆ ಗೃಹ ಸಚಿವರು ಭೇಟಿ ನೀಡಿದ್ದರು. ಭೇಟಿ ನೀಡುವಂತೆ ನಾನೇ ಸೂಚನೆ ನೀಡಿದ್ದೆ. ಇಲ್ಲಿ ಗೃಹ ಸಚಿವರು ಇರಲಿಲ್ಲ. ಮಾಜಿ ಸಚಿವರು, ಶಾಸಕ ಬಸವರಜ ಶಿವಣ್ಣನವರ ಭೇಟಿ ನೀಡಿದ್ದಾರೆ. ಸಂತ್ರಸ್ತೆ ಯನ್ನು ಭೇಟಿ ಮಾಡಿ ಬರುವುದು ಸಾಂತ್ವನ ಹೇಳುವುದು ಒಂದು ಭಾಗವಾದರೆ ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳುವುದು ಮತ್ತೊಂದು ಭಾಗ ಎಂದರು.
ಸಂತ್ರಸ್ತೆಗೆ ಚಿಕಿತ್ಸೆ ನೀಡದೇ ಆರೋಪಿಗೆ ಪೊಲೀಸರು ಚಿಕಿತ್ಸೆ ಕೊಡಿಸುತ್ತಿದ್ದಾರೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಶಿವಣ್ಣನವರೊಂದಿಗೆ ಮಾತನಾಡಿ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
ಈವೇಳೆ ಸಚಿವರಾದ ಮಂಕಾಳ ವೈದ್ಯ, ಶಿವಾನಂದ ಪಾಟೀಲ್, ಶಾಸಕರದ ಬಸವರಾಜ ಶಿವಣ್ಣನವರ, ಶ್ರೀನಿವಾಸ ಮಾನೆ, ಪ್ರಕಾಶ ಕೋಳಿವಾಡ ಮತ್ತಿತರರು ಇದ್ದರು.
ಫೆಬ್ರವರಿಯಲ್ಲಿ ಬಜೆಟ್ ಮಂಡನೆ
ಮಾರ್ಚ್ ಮೊದಲ ವಾರದೊಳಗೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವುದರಿಂದ ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೇಂದ್ರದಿಂದ ಪರಿಹಾರ ಬಂದ ನಂತರ ರೈತರಿಗೆ ಪುನಃ ಪರಿಹಾರ
ರೈತರರಿಗೆ ಪರಿಹಾರ ನೀಡಿಲ್ಲವೆಂದು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ರೈತರಿಗೆ ೨೦೦೦ ರೂ.ಗಳ ತಾತ್ಕಾಲಿಕ ಪರಿಹಾರವನ್ನು ರಾಜ್ಯ ಸರ್ಕಾರ ನೀಡುತ್ತಿದ್ದು ಕೇಂದ್ರ ಸರ್ಕಾರದಿಂದ ಪರಿಹಾರ ಬಂದ ನಂತರ ಪುನಃ ಎನ್.ಡಿ.ಆರ್.ಎಫ್ ನಿಯಮಾವಳಿಗಳ ಪ್ರಕಾರ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮನುಷ್ಯತ್ವ ಇರಬೇಕು
ಅನಂತಕುಮಾರ್ ಹೆಗಡೆಯವರು ಏಕವಚನದಲ್ಲಿ ಮಾತನಾಡುವುದನ್ನು ಕಲಿಸಿದ್ದೇ ಸಿದ್ದರಾಮಯ್ಯ ಅವರು ಎಂದು ಸಮರ್ಥಿಸಿಕೊಂಡಿದ್ದಾರೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯವಾಗಿ ಆರೋಪ ಮಾಡುತ್ತಾರೆ. ಅನಂತ ಕುಮಾರ್ ಹೆಗಡೆ ಅವರು ಇವತ್ತಿನವರೆಗೆ ನಾಪತ್ತೆಯಾಗಿದ್ದರು. ಚುನಾವಣೆ ಹತ್ತಿರ ಬಂದಂತೆ ಕಾಣಿಸಿಕೊಂಡು ಹೇಳಿಕೆ ನೀಡಿದ್ದಾರೆ. ಸಂಸದರಾಗಿ ಮಾಜಿ ಮಂತ್ರಿಯಾಗಿ ಕ್ಷೇತ್ರಕ್ಕೆ ಏನಾದರೂ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಇಂದಿನವರೆಗೆ ಬಡವರ ಸಮಸ್ಯೆ ಕೇಳಿದ್ದಾರೆಯೇ? ಸಂಸ್ಕೃತಿ ಎಂದರೆ ಮನುಷ್ಯತ್ವ. ಮೊದಲು ಮನುಷ್ಯತ್ವ ಇರಬೇಕು ಎಂದರು.