
ಹಾವೇರಿ :ರೂ.೧೫೦ ಕೋಟಿ ವೆಚ್ಚದಲ್ಲಿ ತುಂಗಭದ್ರಾ ನದಿಗೆ ಬ್ಯಾರೇಜ್ ನಿರ್ಮಾಣಕ್ಕೆ ಪ್ರಸ್ತಾವನೆ
– ಸಚಿವ ರುದ್ರಪ್ಪ ಲಮಾಣಿ
ಹಾವೇರಿ : ಸಮರ್ಪಕ ನೀರು ಪೂರೈಕೆ ಹಿನ್ನಲೆಯಲ್ಲಿ ತುಂಗಾಭದ್ರಾ ನದಿಗೆ ರೂ.೧೫೦ ಕೋಟಿ ವೆಚ್ಚದಲ್ಲಿ ಬ್ಯಾರೇಜ್ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನನ್ನ ಅಧಿಕಾರ ಅವಧಿಯಲ್ಲಿ ನೂರಕ್ಕೆ ನೂರರಷ್ಟು ೨೪*೭ ನೀರು ಪೂರೈಕೆ ಹಾಗೂ ಯುಜಿಡಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಸಕ್ಕರೆ, ಜವಳಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಭರವಸೆ ನೀಡಿದರು.
ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರತಿ ವರ್ಷ ನೀರು ಸಂಗ್ರಹಣೆಗೆ ತುಂಗಭದ್ರಾ ನದಿಗೆ ಮರಳಿನ ಚೀಲ ಹಾಕಲಾಗುತ್ತದೆ. ಇದರಿಂದ ವೆಚ್ಚ ಬಹಳವಾಗುತ್ತಿದ್ದು, ಶಾಶ್ವತ ಪರಿಹಾರಕ್ಕೆ ತುಂಗಭದ್ರಾ ನದಿಗೆ ಬ್ಯಾರೇಜ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
೨೪*೭ ನೀರು ಪೂರೈಕೆ ಕಾಮಗಾರಿ ಕುರಿತು ಕೋರ್ಟ್ನಲ್ಲಿ ಪ್ರಕರಣ ನಡೆಯುತ್ತಿತ್ತು. ಹಾಗಾಗಿ ವಿಳಂಬವಾಗಿತ್ತು. ಈಗ ಕೋರ್ಟ ಆದೇಶವಾಗಿದೆ. ಮಾಜಿ ಸಿ.ಎಂ. ಸಿದ್ದಮ್ಮಯ್ಯ ಅವರು ಈ ಯೋಜನೆಗೆ ವಿಶೇಷ ಅನುದಾನ ರೂ.೧೦ ಕೋಟಿ ಮಂಜೂರು ಮಾಡಿದ್ದರು. ಅಮೃತ ೨.೦ ಕೆಲಸ ವೇಗವಾಗಿ ನಡೆಯುತ್ತಿದೆ ಎಂದರು.
ಬರಪೀಡಿತ ಜಿಲ್ಲೆಗೆ ಘೋಷಣೆಗೆ ಮನವಿ: ಜಿಲ್ಲೆಯಲ್ಲಿ ಶೇ.೫೪ ರಷ್ಟು ಮಳೆ ಕೊರತೆ ಇದೆ. ಈ ಕುರಿತು ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಹಸಿರು ಬರವಿದೆ, ಬೆಳೆ ಹಸಿರಾಗಿದೆ, ಆದರೆ ತೆನೆಕಟ್ಟಿಲ್ಲ. ಇದರಿಂದ ಇಳುವರಿ ಬರುವುದಿಲ್ಲ. ಹಾಗಾಗಿ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ನದಿಯಲ್ಲಿ ನೀರು ಇರುವುದರಿಂದ ಜಿಲ್ಲೆಯ ಎಲ್ಲ ಕೆರೆಗಳನ್ನು ತುಂಬಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ರೈತರ ಅನ್ಯಾಯವಾಗದಂತೆ ಕ್ರಮ: ಸಕ್ಕೆರ ಕಾರ್ಖಾನೆಗಳಲ್ಲಿ ತೂಕದಲ್ಲಿ ಮೋಸವಾಗುತ್ತಿರುವ ಬಗ್ಗೆ, ಬೆಲೆ ಏರಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಕುರಿತು ಸಂಬಂಧಿಸಿದವರೊಂದಿಗೆ ಸಭೆಮಾಡಿ, ಯಾವುದೇ ರೈತರಿಗೆ ಅನ್ಯಾಯವಾಗದಂತೆ ಕ್ರಮಕೈಗೊಳ್ಳಲಾಗುವುದು ಭರವಸೆ ನೀಡಿದರು.
ರೂ.೧೦ ಕೋಟಿ: ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ರೂ.೧೦ ವೆಚ್ಚದ ಟೆಂಡರ್ ಕರೆಯಲಾಗಿದೆ. ಅದೇ ರೀತಿ ಕ್ರೀಡಾಂಗಣದ ಮುಂದಿನ ಖಾಲಿ ಆವರಣ ಅಭಿವೃದ್ಧಿಗೆ ಒಂದು ಕೋಟಿ ಮಂಜೂರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬರುವ ದಿನಗಳಲ್ಲಿ ಉತ್ತಮ ರೀತಿಯಲ್ಲಿ ಕ್ರೀಡಾಂಗಣ ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ.ಸಿಇಒ ದಲ್ಜಿತ್ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಯಶೋಧಾ ವಂಟಗೋಡಿ ಉಪಸ್ಥಿತರಿದ್ದರು.

