ಜಿಲ್ಲೆಯ ಕಬ್ಬೂರು ಗ್ರಾಮಕ್ಕೆ ಜಿಲ್ಲಾಧಿಕಾರಿ ದಾನಮ್ಮನವರ ದಿಢೀರ್ ಭೇಟಿ
ಹಾವೇರಿ,: ಜಿಲ್ಲೆಯ ಕಬ್ಬೂರ ಗ್ರಾಮದ ವಿವಿಧ ಸ್ಥಳಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ ಶುಕ್ರವಾರಅನಿರೀಕ್ಷಿತ ಭೇಟಿ ನೀಡಿ ಅಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿದರು.
ಮೊದಲು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆಸ್ಪತ್ರೆಯ ಸ್ವಚ್ಛತೆ ಹಾಗೂ ಸಿಬ್ಬಂದಿಗಳ ಕೆಲಸ ಕಾರ್ಯನಿರ್ವಹಣೆ ಪರಿಶೀಲಿಸಿದರು. ಆಸ್ಪತ್ರೆಗೆ ದಾಖಲಾದ ರೋಗಿಗಳ ಜೊತೆಗೆ ಮಾತನಾಡಿ ಅವರ ಆರೋಗ್ಯ ಕುರಿತು ವಿಚಾರಿಸಿ ಆಸ್ಪತ್ರೆಯ ಸಿಬ್ಬಂದಿಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಆಸ್ಪತ್ರೆಯ ಔಷಧಿ ದಾಸ್ತಾನುಗಳನ್ನು ಪರಿಶೀಲಿಸಿ, ರೋಗಿಗಳಿಗೆ ಅವಶ್ಯಕವಾದ ಔಷಧಿಗಳನ್ನು ತರಿಸಿಕೊಳ್ಳಲು ಸೂಚಿಸಿದರು ಅನಗತ್ಯ ವಿಳಂಬ ಮಾಡದೆ ಆಸ್ಪತ್ರೆಗೆ ದಾಖಲಾದ ರೋಗಿಗಳಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯುವಂತಾಗಬೇಕು ಎಂದರು. ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳೊಂದಿಗೆ ಅನುಚಿತವಾಗಿ ವರ್ತಿಸುವಂತಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿಗಳಿಗೆ ಎಚ್ಚರಿಸಿದರು. ಬಳಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಕುಂದು ಕೊರತೆಗಳನ್ನು ಆಲಿಸಿದರು.
ಆಸ್ಪತ್ರೆ ಭೇಟಿ ನಂತರ ಅದೇ ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ಡಾ.ಬಿ ಆರ್ ಅಂಬೇಡ್ಕರ್ ಸರಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೆ ಭೇಟಿ, ವಸತಿ ನಿಲಯದ ಊಟದ ಕೊಠಡಿ, ದಾಸ್ತಾನು ಕೊಠಡಿ ಹಾಗೂ ಬಾಲಕರ ವಾಸ್ತವ್ಯದ ಕೊಠಡಿ ವೀಕ್ಷಿಸಿದರು. ಬಳಿಕ ವಸತಿ ನಿಲಯದ ಸ್ವಚ್ಛತೆಯನ್ನು ಪರಿಶೀಲಿಸಿದರು. ವಸತಿ ನಿಲಯದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ನೀಡುವ ಆಹಾರದ ಗುಣಮಟ್ಟ ಮುಂತಾದವುಗಳನ್ನು ಪರಿಶೀಲಿಸಿದರು. ಅಲ್ಲಿನ ಸಿಬ್ಬಂದಿಗಳಿಗೆ ವಸತಿ ನಿಲಯದ ಸುತ್ತಮುತ್ತಲಿನ ಸ್ಥಳವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ವಿದ್ಯಾರ್ಥಿಗಳು ವಾಸಿಸುವಂತಹ ವಸತಿ ನಿಲಯಗಳಲ್ಲಿ ಸ್ವಚ್ಛತೆಗೆ ಮೊದಲು ಆದ್ಯತೆ ನೀಡಬೇಕು ಇದರಿಂದ ರೋಗ ರುಜಿನಗಳನ್ನು ಹತೊಟಿಗೆ ತರಲು ಸಾಧ್ಯವಾಗುತ್ತದೆ ಎಂದು ವಸತಿನಿಲಯದ ಸಿಬ್ಬಂದಿಗಳಿಗೆ ಸೂಚಿಸಿದರು.