
ಹಾವೇರಿ ವಿಧಾನಸಭಾ ಕ್ಷೇತ್ರದಲ್ಲಿ ಬರ ಘೊಷಿಸಿ: ವೆಂಕಟೇಶ ನಾರಾಯಣಿ
ಹಾವೇರಿ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬೆಳೆಗಳ ಇಳುವರಿ ಕುಂಠಿತವಾಗಿದ್ದು, ಜಲಮೂಲಗಳು ಆತಂಕಕಾರಿ ಸ್ಥಿತಿಗೆ ತಲುಪಿವೆ. ಹಾವೇರಿ ಹಾಗೂ ಸವಣೂರು ತಾಲೂಕುಗಳಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿರುವುದರಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಹಾವೇರಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಈ ಎರಡೂ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿ ರೈತರ ನೆರವಿಗೆ ಸರಕಾರ ಮುಂದಾಗಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ ನಾರಾಯಣಿ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಯಲು ಸೀಮೆ ಪ್ರದೇಶವಾಗಿರುವ ಹಾವೇರಿ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಹಾಗೂ ಬೆಳೆ ಬಂದಿಲ್ಲ. ಹೀಗಾಗಿ ಕೆರೆ-ಕಟ್ಟೆಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯದ ಸ್ಥಿತಿ ನಿರ್ಮಾಣವಾಗಿದೆ. ಪ್ರಸಕ್ತ ವರ್ಷವೂ ಮಳೆ ಕೊರತೆಯ ನಡುವೆಯೇ ರೈತರು ಅಲ್ಪ ಪ್ರಮಾಣದಲ್ಲಿ ಬೆಳೆ ಬೆಳೆದಿದ್ದು, ಇದೀಗ ಇಳುವರಿ ಕುಂಠಿತವಾಗಿರುವುದರಿAದ ಮಾಡಿದ ಖರ್ಚು ಕೂಡ ಕೈಗೆ ಬಾರದ ಆತಂಕದಲ್ಲಿದ್ದಾರೆ ಎಂದರು.
ಪ್ರಸಕ್ತ ವರ್ಷ ಅರೆಬರೆ ಮಳೆಯಿಂದ ಮೆಕ್ಕೆಜೋಳ, ಸೋಯಾಬಿನ್, ಹತ್ತಿ ಹಾಗೂ ಶೇಂಗಾ ಬೆಳೆಗಳು ಬಿಸಿಲಿನ ತಾಪಕ್ಕೆ ಒಣಗಿ ಹೋಗಿವೆ. ಇಂತಹ ಪರಿಸ್ಥಿತಿಯಲ್ಲಿಯೂ ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ಇಲ್ಲ ಎಂಬ ರೀತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರು ನೀಡಿರುವ ಹೇಳಿಕೆ ಸರಿಯಲ್ಲ. ಬೆಳೆ ಹಸಿರಾಗಿದ್ದರೂ ತೆನೆ, ಕಾಳು ಕಟ್ಟುತ್ತಿಲ್ಲ. ಮೆಕ್ಕೆಜೋಳದಲ್ಲಿ ಕೇವಲ ಒಣಗಿದ ಬೆಂಡು ಮಾತ್ರ ಇದೆ. ಸೋಯಾಬಿನ್ನಲ್ಲಿ ಸರಿಯಾಗಿ ಕಾಳು ಮೂಡಿಲ್ಲ ಎಂದು ಅಸಮಾಧಾನ ಹೊರಹಾಕಿದ ಅವರು, ಜಿಲ್ಲೆಯ ವಸ್ತುಸ್ಥಿತಿಯನ್ನು ಸರಕಾರದ ಗಮನಕ್ಕೆ ತಂದು ಹಾವೇರಿ ಮತ್ತು ಸವಣೂರು ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲು ಸಚಿವರು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ೨೦೨೫-೨೬ನೇ ಸಾಲಿನ ಮುಂಗಾರು ಬೆಳೆ ಪರಿಹಾರದ ಹಣವನ್ನು ರೈತರ ಖಾತೆಗಳಿಗೆ ಕೂಡಲೇ ಜಮಾ ಮಾಡಬೇಕು. ಬೆಳೆ ಪರಿಹಾರ ಬಿಡುಗಡೆಗೊಳಿಸಿ ಬರದಿಂದ ತತ್ತರಿಸಿರುವ ರೈತರಿಗೆ ಸರಕಾರ ನೆರವಾಗಬೇಕು ಎಂದು ಒತ್ತಾಯಿಸಿದರು.
ಮುಖಂಡ ಹನುಮಂತಪ್ಪ ದಾಸರ ಮಾತನಾಡಿ, ತಾಲೂಕಿನ ಪೂರ್ವ ಭಾಗದಲ್ಲಿರುವ ಬಸಾಪುರ, ಶಿಬಾರ, ಯಲಗಚ್ಚö, ಕೂರಗುಂದ, ಭರಡಿ ಸೇರಿದಂತೆ ಜಿಲ್ಲೆಯಲ್ಲಿ ಬರದ ಛಾಯೆ ಇದ್ದುö, ಸರಕಾರ ಕೂಡಲೇ ಹಾವೇರಿ, ಸವಣೂರು ತಾಲೂಕುಗಳನ್ನು ಶೀಘ್ರವೇ ಬರಪೀಡಿತ ಎಂದು ಘೋಷಿಸಬೇಕು. ಇಲ್ಲದಿದ್ದರೆ, ಬಳ್ಳಾರಿ ಚಲೋ ಮಾದರಿಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ, ವೆಂಕಟೇಶ ನಾರಾಯಣಿ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಆನಂದ ಕಲಾಲ, ಲಲಿತಾ ಗುಂಡೇನಹಳ್ಳಿ, ಶ್ರೀದೇವಮ್ಮ ರಡ್ಡಿö, ದಯಾನಂದ ಭಜಂತ್ರಿö, ರಾಜು ಕಳ್ಳಿಮನಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

